ಕಾರವಾರ: ನಗರದ ಮೀನು ಮಾರುಕಟ್ಟೆಯಲ್ಲಿ ಗೋವಾ ರಾಜ್ಯದ ಲಾಟರಿ ಟಿಕೆಟ್ಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಗೋವಾ ಮೂಲದ ವ್ಯಕ್ತಿಯೊಬ್ಬನನ್ನು ಕಾರವಾರ ಶಹರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗೋವಾ ರಾಜ್ಯದ ಪೊಂಡಾದ ಗಣೇಶೋತ್ಸವ ಸಮಿತಿಯೊಂದಕ್ಕೆ ಸಂಬಂಧಿಸಿದ ಲಾಟರಿ ಟಿಕೆಟ್ಗಳನ್ನು ಕಾರವಾರದಲ್ಲಿ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ₹500 ಮುಖಬೆಲೆಯ ಟಿಕೆಟ್ಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದ್ದು, ದೊಡ್ಡ ಮೊತ್ತದ ಬಹುಮಾನವಿದೆ ಎಂಬ ಕಾರಣಕ್ಕೆ ಸಾರ್ವಜನಿಕರು ಟಿಕೆಟ್ ಖರೀದಿಸಲು ಮುಗಿಬಿದ್ದಿದ್ದರು ಎನ್ನಲಾಗಿದೆ.
ಈ ಕುರಿತು ಮಾಹಿತಿ ಪಡೆದ ಕಾರವಾರ ಶಹರ ಠಾಣೆ ಪೊಲೀಸರು ಮೀನು ಮಾರುಕಟ್ಟೆ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ, ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ ಗೋವಾ ಮೂಲದ ವಿನೋದ ಸುರೇಶ ವಾಂಗೆಲೆ (35-40) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿತನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದ್ದು, ಗೋವಾ ಲಾಟರಿ ಟಿಕೆಟ್ಗಳನ್ನು ಕಾರವಾರದಲ್ಲಿ ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.









